ಅರ್ಜಿ ಸಲ್ಲಿಕೆಯಾಗಿ 1 ವರ್ಷ ಕಳೆದಿದ್ದು, ಈವರೆಗೆ 3ನೇ ಬಾರಿ ಕಾಲಾವಕಾಶ ಕೋರಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಬೇಕು ಎಂಬ ಉದ್ದೇಶವಿಲ್ಲ. ನಮ್ಮ ಆದೇಶಗಳೆಂದರೆ ಅಲಂಕಾರಿಕ ಪೇಪರ್ಗಳೆಂದು ಸರ್ಕಾರ ಭಾವಿಸಿ ಹಲವಾರು ಬಾರಿ ಕಾಲಾವಕಾಶ ಕೋರುತ್ತಿದೆ ಎಂದು ನ್ಯಾಯಪೀಠ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.
ರಾಜ್ಯದಲ್ಲಿ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು, ‘ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ’ ರಚಿಸಲು ಸರ್ಕಾರವು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ನಡೆಸುತ್ತಿದ್ದ ಮುಖ್ಯನ್ಯಾಯಮೂರ್ತಿ ಪಿ.ಬಿ.ವರಾಲೆ ಅವರಿದ್ದ ವಿಭಾಗೀಯ ಪೀಠದ ಮುಂದೆ, ಸರ್ಕಾರದ ಪರ ವಕೀಲರು ಹಾಜರಾಗಿ ಮತ್ತೆ 12 ವಾರ ಕಾಲಾವಕಾಶ ಕೇಳಿದರು. ಆದರೆ ಸರ್ಕಾರದ ಈ ನಡೆಗೆ ನ್ಯಾಯಪೀಠ ಅತೃಪ್ತಿ ವ್ಯಕ್ತಪಡಿಸಿತು.
ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಮರುವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಪದೇ ಪದೇ ಕಾಲಾವಕಾಶ ಕೋರುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ 5 ಲಕ್ಷ ರೂಪಾಯಿ ದಂಡ ವಿಧಿಸಿದೆ